ಮುಂದಿನ 60ದಿನದೊಳಗೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದಿದ್ದರೆ 10 ಸಾವಿರ ರೂ.ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಗಡುವು ನೀಡಿ ಎಚ್ಚರಿಸಿದ್ದಾರೆ.
ಅವರು ನಗರದ ಶಿಕ್ಷಕರ ಸದನದಲ್ಲಿ ಸಪ್ನ ಬುಕ್ ಹೌಸ್ನಲ್ಲಿ ಹಮ್ಮಿಕೊಂಡಿದ್ದ ವಿವಿಧ ಲೇಖಕರ 52ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತ್ರಿಭಾಷಾ ಸೂತ್ರದನ್ವಯ ಪ್ರಾದೇಶಿಕ ಭಾಷೆಯಾದ ಕನ್ನಡಕ್ಕೆ ಪ್ರಥಮ ಸ್ಥಾನ ನೀಡುವ ಸಲುವಾಗಿ ಕಡ್ಡಾಯವಾಗಿ ಎಲ್ಲ ವಾಣಿಜ್ಯ ಉದ್ಯಮ, ಸರ್ಕಾರಿ, ಖಾಸಗಿ ಕಂಪೆನಿಗಳು ಹಾಗೂ ಕಚೇರಿಗಳಲ್ಲಿ ಕನ್ನಡ ನಾಮಫಲಕ ಹಾಕಬೇಕು. ಈ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.
ವಿಧಾನಸೌಧ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಚೇರಿಗಳಲ್ಲೂ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಿಕೊಳ್ಳಬೇಕು. ಇದನ್ನು ಉಲ್ಲಂಘಿಸಿದರೆ 10ಸಾವಿರ ರೂ.ದಂಡ ವಿಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. |