ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವುದಾಗಿ ಘೋಷಣೆ ಮಾಡಿರುವ ಕೇಂದ್ರ ಸರ್ಕಾರ ಇದೀಗ ಮದ್ರಾಸ್ ಹೈಕೋರ್ಟ್ನತ್ತ ಬೆರಳು ತೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ಹೆಜ್ಜೆ ಕುರಿತು ಗಂಭೀರ ಚಿಂತನೆ ನಡೆಸಿದೆ.
ಈ ಸಂಬಂಧ ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ಅವರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ತುಸು ಕಾದು ನೋಡುವ ತಂತ್ರ ಅನುಸರಿಸಲು ತೀರ್ಮಾನಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ನಲ್ಲಿ ಆರ್. ಗಾಂಧಿ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸುವಲ್ಲಿ ಕೇಂದ್ರ ಸರ್ಕಾರದ ಮಹತ್ವದ ಪಾತ್ರ ವಹಿಸಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಯಾವುದಾದರೊಂದು ಕ್ರಮ ಕೈಗೊಳ್ಳಬಹುದೇನೋ ಎಂಬ ನಿರೀಕ್ಷೆಯನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ.
ಈ ನಡುವೆ ಸಾರ್ವಜನಿಕ ಅರ್ಜಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟದ ಕೆಲವು ವ್ಯಕ್ತಿಗಳು ಅರ್ಜಿ ಸಲ್ಲಿಸಿದ್ದು, ಇದಕ್ಕೆ ರಾಜ್ಯ ಸರ್ಕಾರ ಬೆಂಬಲ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.
ಆದರೆ ಕೇಂದ್ರ ಸರ್ಕಾರವೇ ಈ ಅರ್ಜಿ ಕುರಿತು ಕ್ರಮ ಕೈಗೊಳ್ಳಬೇಕು. ಏಕೆಂದರೆ ಕೇಂದ್ರ ರಚಿಸಿದ ಆಯ್ಕೆ ಸಮಿತಿಯ ವಿಶ್ವಾಸಾರ್ಹತೆಯನ್ನೇ ಗಾಂಧಿ ಪ್ರಶ್ನಿಸಿದ್ದಾರೆ. ಹೀಗಾಗಿ ತಮ್ಮ ಸಮಿತಿ ರಚನೆಯನ್ನು ಸಮರ್ಥಿಸಿಕೊಂಡು ಗಾಂಧಿ ಮೊಕದ್ದಮೆ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸುವುದು ಹೆಚ್ಚು ಪ್ರಸ್ತುತ ಎಂಬುದು ರಾಜ್ಯ ಸರ್ಕಾರದ ಅಂಬೋಣ.
ಅಲ್ಲದೆ, ಕೇಂದ್ರ ಸರ್ಕಾರ ಸಧ್ಯದಲ್ಲಿಯೇ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಿದೆ. ಆ ಅಧಿಸೂಚನೆಯನ್ನು ಪರಿಶೀಲನೆ ನಡೆಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾಸಿದೆ. |