ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ಬಸ್ ಸಂಚಾರವನ್ನು ನಿರ್ಬಂಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿರುವ ಸಚಿವ ಆರ್.ಅಶೋಕ್, ತನ್ಮೂಲಕ ಮತ್ತೊಮ್ಮೆ ಖಾಸಗಿ ಮತ್ತು ಸರ್ಕಾರದ ನಡುವೆ ಕಾನೂನು ಸಮರ ನಡೆಯಲು ವೇದಿಕೆ ಸಿದ್ದವಾದಂತಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ಕಾರಿ ಬಸ್ಗಳು ಮಾತ್ರ ಸಂಚರಿಸಬೇಕು ಎಂಬ ನಿಯಮ ಇದೆ.
ಈ ಹಿಂದೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಸಂಚಾರ ವ್ಯವಸ್ಥೆ ಕಲ್ಪಿಸಲು ಸರ್ಕಾರ ವಿಫಲವಾಗಿತ್ತು. ಆ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರುವ ಮೂಲಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಲು ಅನುಮತಿ ಪಡೆದಿದ್ದರು.
ಇದೀಗ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಒದಗಿಸಲು ಸಾಮರ್ಥ್ಯ ಹೊಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಹೈಕೋರ್ಟ್ನಲ್ಲಿ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.
ಅದೇ ರೀತಿ ಮಂಗಳೂರಿನ ನಗರ ಸಾರಿಗೆಯಲ್ಲಿ ಖಾಸಗಿಯವರ ಏಕಸ್ವಾಮ್ಯ ಮುರಿಯುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಇಲ್ಲಿ ಬಿಎಂಟಿಸಿ ಮಾದರಿಯಲ್ಲಿಯೇ ನಗರ ಸಾರಿಗೆ ಸಂಚಾರವನ್ನು ಶೀಘ್ರದಲ್ಲಿ ಆರಂಭಿಸಲಾಗುವುದು. ಈ ನಿಟ್ಟಿನಲ್ಲಿ ನೀಲ ನಕಾಶೆ ಸಿದ್ದಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. |