ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನ. 10ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಸಂಬಂಧ ನಗರದ ಹೊರ ವಲಯದ ದೇವನಹಳ್ಳಿ ಸಮೀಪದ ಬೆಟ್ಟ ಹಲಸೂರಿನಲ್ಲಿ ನ.17ರಂದು ಬೃಹತ್ ಸಮಾವೇಶ ಆಯೋಜಿಸುವ ಹಿನ್ನೆಲೆಯಲ್ಲಿ ಸುಮಾರು 250 ಎಕರೆ ಪ್ರದೇಶದಲ್ಲಿ ವೇದಿಕೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ.
ಬೃಹತ್ ಸಮಾವೇಶವನ್ನು ಆಯೋಜಿಸುವ ಮೂಲಕ ಜೆಡಿಎಸ್ ತನ್ನ ಶಕ್ತಿ ಪ್ರದರ್ಶನ ನಡೆಸಲಿದ್ದು, ಸಮಾರಂಭಕ್ಕೆ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸುವತ್ತ ನಾಯಕರು ಚಿತ್ತ ಹರಿಸಿದ್ದಾರೆ. ಇದಕ್ಕಾಗಿ ಈಗಾಗಲೇ ತಾಲೂಕು ಹಾಗೂ ಜಿಲ್ಲಾ ಘಟಕಗಳ ಎಲ್ಲಾ ಮುಖಂಡರಿಗೂ ಜೆಡಿಎಸ್ ಸೂಚನೆ ನೀಡಿದೆ.
ಕಳೆದ ವಿಧಾನಸಭಾ ಚುನಾವಣೆಯ ಸೋಲಿನಿಂದ ಹೊರಬಂದಿರುವ ಜೆಡಿಎಸ್ ತಮ್ಮ ಪಕ್ಷದ ತತ್ತ್ವ, ಸಿದ್ದಾಂತಗಳ ಮೇಲೆ ಜನ ನಂಬಿಕೆ ಇಟ್ಟುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪಕ್ಷದ ಮೇಲೆ ಮತದಾರರ ಒಲವು ಕಡಿಮೆಯಾಗಿಲ್ಲ ಎಂಬುದನ್ನು ವಿರೋಧ ಪಕ್ಷಗಳಿಗೆ ತೋರಿಸುವ ನಿಟ್ಟಿನಲ್ಲಿ ಬೃಹತ್ ಸಮಾರಂಭ ಆಯೋಜಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ವಹಿಸಿಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. |