ಕರಾವಳಿಯ ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಸಲುವಾಗಿ ಪ್ರತ್ಯೇಕ ಪ್ಯಾಕೇಜ್ ಸಿದ್ದಪಡಿಸುತ್ತಿರುವುದಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ- ಈ ಮೂರು ಜಿಲ್ಲೆಗಳ ಅಭಿವೃದ್ಧಿಯನ್ನು ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿಪಡಿಸುವ ಉದ್ದೇಶ ಇದೆ ಎಂದು ತಿಳಿಸಿದ್ದಾರೆ.
ಈ ಪ್ಯಾಕೆಜ್ ಗಳನ್ನು ಕನಿಷ್ಠ 50 ವರ್ಷಗಳ ದೂರದೃಷ್ಟಿ ಇಟ್ಟುಕೊಂಡೇ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಮಾಡಬೇಕಾಗಿರುವ ಕಾರ್ಯಗಳ ಕುರಿತಾದ ಸಮಗ್ರ ವರದಿಯನ್ನು ಮಾರ್ಚ್ 31ರಂದು ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೂರು ಜಿಲ್ಲೆಗಳಲ್ಲಿಯೂ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಈ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವ ಕೆಲಸವನ್ನು ಪ್ರಾಧಿಕಾರ ಮೊದಲು ಮಾಡಲಿದೆ. ಈ ಯೋಜನೆಗಾಗಿ ಮುಖ್ಯಮಂತ್ರಿಗಳು ಮೂರು ಜಿಲ್ಲೆಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. |