ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ನಡೆದ ಚುನಾವಣೆಗೆ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿರುವ ಹಿನ್ನೆಲೆಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ ನೇತೃತ್ವದಲ್ಲಿ ಪಕ್ಷದ ಸಭೆ ನಡೆಯಲಿದೆ.
ಕಾಂಗ್ರೆಸ್ನ ಹಿರಿಯ ಮುಖಂಡರು, ಶಾಸಕರು, ಸಂಸದರು ಹಾಗೂ ಶಾಸಕರು ಸೇರಿದಂತೆ ಹಲವು ನಾಯಕರುಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಪರಿಷತ್ನಲ್ಲಿನ ಸೋಲು ಹಾಗೂ ಪಕ್ಷದ ಮುಂದಿರುವ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಮುಖಂಡರ ನಡುವೆ ಇರುವ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳ ಬಗ್ಗೆಯೂ ಸಬೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಅಲ್ಲದೆ, ಮುಂಬರುವ ಚುನಾವಣೆಯಲ್ಲಿ ಯಾವ ರೀತಿ ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಇದೇ ವೇಳೆ ಸೋಲಿನ ಕುರಿತು ವಿವರಣೆ ನೀಡುವಂತೆ ಹೈಕಮಾಂಡ್ ಆರ್.ವಿ. ದೇಶಪಾಂಡೆ ಅವರನ್ನು ಕರೆಸಿಕೊಂಡು ಮಾಹಿತಿ ಸಂಗ್ರಹಿಸಿದೆ. ರಾಜ್ಯದಲ್ಲಿ ಕಂಗೆಟ್ಟಿದ್ದ ಕಾಂಗ್ರೆಸ್ ಪಕ್ಷವನ್ನು ಜೀರ್ಣೋದ್ಧಾರ ಮಾಡಲು ಹೊಸ ಕಾರ್ಯತಂತ್ರ ರೂಪಿಸಿ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರನ್ನು ನೇಮಕ ಮಾಡಿತ್ತು.
ಜೆಡಿಎಸ್ ಬೆಂಬಲದೊಂದಿಗೆ ಚುನಾವಣೆ ಎದುರಿಸಿದರೂ, ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗಳಿಸಿರಲಿಲ್ಲ. ಈ ನಿಟ್ಟಿನಲ್ಲಿ ವಿವರಣೆ ಕೇಳಿರುವ ಹೈಕಮಾಂಡ್ ಜೊತೆ ಕೆಪಿಸಿಸಿ ಅಧ್ಯಕ್ಷರು ಪರಾಮರ್ಶೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪೃಥ್ವಿರಾಜ್ ಚೌಹಾಣ್ ಅವರೊಂದಿಗೂ ಮಾತುಕತೆ ನಡೆಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. |