ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಉಸ್ತುವಾರಿ ಸಮಿತಿ ರಚಿಸುವ ಸರ್ಕಾರದ ನಿರ್ಧಾರಗಳನ್ನು ಬಲವಾಗಿ ವಿರೋಧಿಸಿರುವ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ, ನೂತನ ಬಿಜೆಪಿ ಸರ್ಕಾರಕ್ಕೆ ವಿಕೇಂದ್ರೀಕರಣ ವ್ಯವಸ್ಥೆಯ ಬಗ್ಗೆ ಬದ್ಧತೆ ಇಲ್ಲ ಎಂದು ಆರೋಪಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಸ್ತುವಾರಿ ಸಮಿತಿ ಸದಸ್ಯರು ಪ್ರತಿ ತಿಂಗಳೂ ಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಪರಿಶೀಲನೆ ಮಾಡುವುದೇ ಜನಪ್ರತಿನಿಧಿಗಳಿಗೆ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ 5,550 ಗ್ರಾಮ ಪಂಚಾಯ್ತಿಗಳಲ್ಲಿ ಸುಮಾರು 91 ಸಾವಿರ ಜನಪ್ರತಿನಿಧಿಗಳು ಕಾರ್ಯನಿರ್ವಹಿಸತ್ತುದ್ದಾರೆ. ಇವರ ಮೇಲೆ ಸರ್ಕಾರಕ್ಕೆ ವಿಶ್ವಾಸವಿಲ್ಲವೇ ಎಂದು ಪ್ರಶ್ನಿಸಿದ ಅವರು, ನ್ಯಾಯಾಲಯಗಳು ಹಲವಾರು ಬಾರಿ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದೆ. ಅಂದ ಮಾತ್ರಕ್ಕೆ ರಾಜ್ಯ ಸರ್ಕಾರದ ಮೇಲೆ ಉಸ್ತುವಾರಿ ಸಮಿತಿ ರಚಿಸಲು ಸಾಧ್ಯವೇ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. |