ನಗರದ ಕೋರಮಂಗಲದ ಈಜಿಪುರದಲ್ಲಿ ಆರ್ಥಿಕವಾಗಿ ದುರ್ಬಲರಿಗೆ ಕ್ವಾರ್ಟರ್ಸ್ ನಿರ್ಮಾಣ ಮಾಡುವ ಹೊಣೆಯನ್ನು ಮೇವರಿಕ್ ಸಂಸ್ಥೆಗೆ ವಹಿಸಿರುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕ್ವಾರ್ಟರ್ಸ್ ನಿರ್ಮಾಣ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ನೀಡಿರುವುದನ್ನು ಪ್ರಶ್ನಿಸಿ ಮುಂಬೈ ಮೂಲದ ಆಕೃತಿ ಸಿಟಿ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ಮೇವರಿಕ್ ಹೋಲ್ಡಿಂಗ್ಸ್ ಅಂಡ್ ಇನ್ವೆಸ್ಟ್ ಮೆಂಟ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ಹಿನ್ನೆಲೆ:
ಕೋರಮಂಗಲದ ಈಜಿಪುರದಲ್ಲಿ ಆರ್ಥಿಕವಾಗಿ ದುರ್ಬಲರಿಗೆಂದು ನಿರ್ಮಿಸಲು ಯೋಜಿಸಿದ್ದ ಕ್ವಾರ್ಟರ್ಸ್ ನಿರ್ಮಾಣ ಕಾಮಗಾರಿಯನ್ನು ರಾಜ್ಯ ಸರ್ಕಾರ ಮೇವರಿಕ್ ಸಂಸ್ಥೆಗೆ ವಹಿಸಿಕೊಟ್ಟಿತು. ಇದನ್ನು ಪ್ರಶ್ನಿಸಿ ಆಕೃತಿ ಸಿಟಿ ಲಿಮಿಟೆಡ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸರ್ಕಾರ ಕಾನೂನು ಬಾಹಿರವಾಗಿ ಈ ಕ್ರಮ ಕೈಗೊಂಡಿದೆ.
ಈ ಆದೇಶವನ್ನು ರದ್ದುಪಡಿಸುವಂತೆ ಕೋರಿತ್ತು. ಅಲ್ಲದೆ, ಮೇವರಿಕ್ ಸಂಸ್ಥೆಗೆ ವಸತಿ ನಿರ್ಮಾಣ ಯೋಜನೆಯನ್ನು ವಹಿಸಿಕೊಟ್ಟ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಬೇಕೆಂಬ ಮಧ್ಯಂತರ ಕೋರಿಕೆಯನ್ನು ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಮಧ್ಯಂತರ ಕೋರಿಕೆಯನ್ನು ಮಾನ್ಯ ಮಾಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಲಯದ ತಡೆಯಾಜ್ಞೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಗಮನಿಸಿದರೆ ಸರ್ಕಾರ ತಪ್ಪು ಎಸಗಿರುವ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ತಿಳಿಸಿದ್ದಾರೆ. |