ಶಾಸಕರ ಖರೀದಿ ಬಳಿಕ ಇದೀಗ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಚುನಾಯಿತ ಪ್ರತಿನಿಧಿಗಳನ್ನು ಖರೀದಿಸಲು ಹೊರಟಿರುವ ಬಿಜೆಪಿಯವರಿಗೆ ಆಪರೇಷನ್ ಕಮಲವೇ ಮುಳುವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದ ಮುಖಂಡರನ್ನು ತಮ್ಮತ್ತ ಸೆಳೆದ ಕೂಡಲೇ ಆ ಪಕ್ಷ ಬಲಿಷ್ಟವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಇದೇ ಆ ಪಕ್ಷಕ್ಕೆ ತೊಡಕಾಗಲಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳನ್ನು ಹಣ ಹಾಗೂ ಆಮಿಷವೊಡ್ಡಿ ಸೆಳೆಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಿಕ್ಕುತಪ್ಪಿಸಲು ಹೊರಟಿದ್ದಾರೆ ಎಂದು ಅವರು ದೂರಿದರು.
ಇದೇ ವೇಳೆ ಮುಖ್ಯಮಂತ್ರಿಯವರನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಹರಕೆ ತೀರಿಸಲು ಕೇರಳದ ದೇವಸ್ಥಾನಕ್ಕೆ ಆನೆ ನೀಡಿರುವ ಯಡಿಯೂರಪ್ಪ ಅವರು ಮೊದಲು ರಾಜ್ಯದ ಜನತೆಯ ಋಣ ತೀರಿಸಲಿ. ಅಧಿಕಾರಕ್ಕೆ ಬಂದಾಗಿನಿಂದ ದೇವಾಲಯಗಳ ಅಭಿವೃದ್ಧಿಗೆ ಗಮನ ಹರಿಸುತ್ತಿದ್ದಾರೆ ಹೊರತು ನಾಡಿನ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿದ್ದೆಯೋ ಇಲ್ಲವೋ ಎಂಬ ಭಾವನೆ ಮೂಡುವಂತಾಗಿದೆ ಎಂದು ಆರೋಪಿಸಿದ ಅವರು, ಕೇವಲ ಪ್ರಚಾರದಲ್ಲಿ ತೊಡಗಿರುವ ಮುಖಂಡರು ಅಬ್ಬರದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
|