ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಅವರ ಬೆಂಬಲಿಗರು ನಗರದ ಹೊಟೇಲ್ವೊಂದರಲ್ಲಿ ಗುರುವಾರ ರಹಸ್ಯವಾಗಿ ಸಮಾಲೋಚನೆ ನಡೆಸಿದ್ದಾರೆ.
ಇದೊಂದು ಔಪಚಾರಿಕ ಭೇಟಿ ಎಂದು ಸಿದ್ದು ಬಣದ ಮುಖಂಡರು ತಿಳಿಸಿದ್ದರೂ, ಕಾಂಗ್ರೆಸ್ ಪಕ್ಷ ತಮ್ಮನ್ನು ಕಡೆಗಣಿಸುತ್ತಿದೆ. ಈ ನಿಟ್ಟಿನಲ್ಲಿ ಮುಂದೆ ಹೆಜ್ಜೆ ಏನು ಎಂಬ ಬಗ್ಗೆ ವಿವರವಾದ ಚರ್ಚೆ ನಡೆಯಿತು ಎಂದು ಬಲ್ಲ ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ವಂಚಿತರಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಸಿದ್ದರಾಮಯ್ಯ ತಮ್ಮ ಮುಂದಿನ ರಾಜಕೀಯ ನಡೆಯ ಕುರಿತು ಬೆಂಬಲಿಗರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಮಾಜಿ ಸಂಸದ ಕೋದಂಡರಾಮಯ್ಯ, ಮಾಜಿ ಸಚಿವರಾದ ಡಾ| ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭಲದಲ್ಲಿ ಹಲವು ನಾಯಕರು ಕಾಂಗ್ರೆಸ್ ತೊರೆದು ಹೊಸದೊಂದು ರಾಜಕೀಯ ಪಕ್ಷ ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ ಮುಖಂಡರ ಹೇಳಿಕೆ ಬಗ್ಗೆ ಸಿದ್ದರಾಮಯ್ಯನವರು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈಗ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಕಾದು ನೋಡೋಣ. ಮುಂದೆ ಉಪಚುನಾವಣೆಯಲ್ಲಿಯೂ ಇದೇ ರೀತಿ ಮುಂದುವರಿದರೆ, ಮುಂದಿನ ತೀರ್ಮಾನ ಕೈಗೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
|