ಹೊಗೇನಕಲ್ ಯೋಜನೆಗೆ ಸಂಬಂಧ ಪಟ್ಟಂತೆ ತಮಿಳುನಾಡು ಸರ್ಕಾರ ಕರೆದಿರುವ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೂ ತಮಿಳುನಾಡು ಕಾಮಗಾರಿಯನ್ನು ಕೈಗೊಂಡಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡು ರಾಜ್ಯಗಳ ಮುಖಂಡರ ಸಭೆ ಕರೆದು ವಿವಾದ ಬಗೆಹರಿಸಬೇಕು ಎಂದು ಹೇಳಿದ್ದಾರೆ.
ವಿವಾದಿತ ಹೊಗೇನಕಲ್ ಯೋಜನೆಗೆ ಸಂಬಂಧಪಟ್ಟಂತೆ ತಮಿಳುನಾಡು ಸರ್ಕಾರ ರಾಜ್ಯದ ಅನುಮತಿ ಪಡೆಯದೆ ಏಕಾಏಕಿ ಕಾಮಗಾರಿ ಕೈಗೊಂಡಿರುವುದು ಹಕ್ಕುಚ್ಯುತಿಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಕೆಎಂಎಫ್ ಕುರಿತಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿರೋಧ ಪಕ್ಷದ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿಗಳು, ಸರ್ಕಾರ ಇದರಲ್ಲಿ ಯಾವುದೇ ದುರುದ್ದೇಶ ಹೊಂದಿಲ್ಲ. ಪಕ್ಷಕ್ಕೆ ರಾಜ್ಯದ ಅಭಿವೃದ್ಧಿಯೇ ಮುಖ್ಯ ಗುರಿ ಎಂದರು. |