ಹೆಚ್ಚುತ್ತಿರುವ ಆನೆಗಳ ಅಸ್ವಾಭಾವಿಕ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕುರಿತು ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕಪ್ಪುಸೋಗೆಯಲ್ಲಿ ನಾಲ್ಕು ಆನೆಗಳು ಅಸಹಜ ಸಾವಿಗೀಡಾಗಿರುವ ಮಾಧ್ಯಮಗಳ ವರದಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಸ್ವಪ್ರೇರಣೆಯಿಂದ ಪರಿವರ್ತನೆ ಮಾಡಿದ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್ ಅವರು, ಈ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದರು. ಆನೆಗಳ ಸಾವಿನ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಅವರು, ಕಾಡಾನೆಗಳ ಸಂರಕ್ಷಣೆಗೆ ಸರ್ಕಾರ ಏನೇನು ಕ್ರಮ ಕೈಗೊಂಡಿದೆ ಎಂಬ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳು ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಆನೆಗಳ ಸಾವು ಹೆಚ್ಚಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ಪೀಳಿಗೆಗೆ ಆನೆಗಳನ್ನು ನಾವು ಬರೀ ಚಿತ್ರದಲ್ಲಿ ತೋರಿಸಬೇಕಾಗುತ್ತದೆ. ಆ ರೀತಿಯಾಗದಂತೆ ಆನೆಗಳ ಸಂರಕ್ಷಣೆ ಮಾಡುವುದು ಸರ್ಕಾರ ಹಾಗೂ ಅರಣ್ಯ ಇಲಾಖೆಯ ಕರ್ತವ್ಯವಾಗಬೇಕಾಗಿದೆ ಎಂದು ಎಚ್ಚರಿಸಿದರು. |