ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಹಣದ ಹೊಳೆ ಹರಿದಿದೆ ಎಂಬ ಮಾರ್ಗರೇಟ್ ಆಳ್ವ ಹೇಳಿಕೆಗೆ ಮಾಜಿ ಸಚಿವ, ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ದನಿಗೂಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ನಲ್ಲಿದ್ದ ಭಿನ್ನಮತ ಮತ್ತೆ ಭುಗಿಲೆದ್ದಿದೆ.
ಮಾರ್ಗೇರೇಟ್ ಆಳ್ವ ಸರಿಯಾದುದನ್ನೇ ಹೇಳಿದ್ದಾರೆ. ಅವರು ನೀಡಿರುವ ಹೇಳಿಕೆಗೆ ನಾನು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಪಕ್ಷದ ಎಲ್ಲಾ ರಾಜ್ಯ ನಾಯಕರು ಒಟ್ಟಿಗೆ ಸೇರಿ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಟಿಕೆಟ್ ನೀಡಿದ್ದರೆ ಇಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಸತತವಾಗಿ ನಾಲ್ಕು ಬಾರಿ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದ್ದರೂ, ಟಿಕೆಟ್ ಫೈನಲ್ ಆಗಿದ್ದು, ಕೊನೆ ಘಳಿಗೆಯಲ್ಲಿ. ನಾನೂ ಕೂಡ ದೆಹಲಿಗೆ ಹೋಗಿ ಟಿಕೆಟ್ ಪಡೆದುಕೊಂಡು ಬರುವಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಕಡೆಗೆಣಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕಳೆದ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯುವಲ್ಲಿ ಅವರ ಸಹಾಕಾರವಿತ್ತು ಎಂದು ಹೇಳಿದ್ದಾರೆ. |