ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಸಿಕೊಂಡು 'ಆಪರೇಷನ್ ಕಮಲ'ಕ್ಕೆ ಮತ್ತೆ ಮುಂದಾಗಿರುವ ಬಿಜೆಪಿ, ಕಾಂಗ್ರೆಸ್ ಮುಖಂಡ ಅಂಬರೀಷ್ ಅವರಿಗೆ ಗಾಳ ಹಾಕಿದೆ.ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿ ಮುಖಂಡರು ಅಂಬರಿಷ್ ಜೊತೆಯಲ್ಲಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದ ಕಣಕ್ಕಿಳಿಯುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಒಕ್ಕಲಿಗರ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ತನ್ನ ಅಧಿಪತ್ಯ ಸಾಧಿಸಲು ಹೊರಟಿರುವ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನ ಅಂಬರೀಷ್ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ವೇದಿಕೆ ಸಿದ್ಧಗೊಳಿಸಿದೆ.ಕಳೆದ ವಿಧಾನಸಭೆಯಲ್ಲಿ ಅಂಬರೀಷ್ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳುವ ನಿಮಿತ್ತ ಹಲವು ಮಾತುಕತೆಗಳು ನಡೆದಿದ್ದರೂ, ಯಾವುದೂ ಯಶಸ್ವಿಯಾಗಿರಲಿಲ್ಲ. ಆದರೆ ಚುನಾವಣೆಯಲ್ಲಿನ ಸೋಲು ಹಾಗೂ ಬಳಿಕ ಪಕ್ಷದಲ್ಲಿ ಮೂಲೆಗುಂಪಾಗಿರುವ ನೋವು ಅಂಬರಿಷ್ಗೆ ಇದೆ ಎಂದು ಅವರ ನಿಕಟವರ್ತಿಗಳು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಹ್ವಾನದತ್ತ ಅಂಬಿ ಒಲವು ತೋರಿದ್ದಾರೆ ಎನ್ನಲಾಗಿದೆ. |