ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆಗೆ ಆಡಳಿತರೂಢ ಭಾರತೀಯ ಜನತಾ ಪಕ್ಷವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಘಟಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರದಲ್ಲಿ ಇದ್ದಾಗ ಎಷ್ಟೇ ಒತ್ತಡ ಬಂದರೂ ವಿದ್ಯುತ್ ಲೋಡ್ ಶೆಡ್ಡಿಂಗ್ ಅನ್ನು ಜಾರಿ ಮಾಡಿರಲಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ವಿದ್ಯುತ್ ಸಮಸ್ಯೆ ಕುರಿತು ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾಗಲು ಆಗ ಉಪಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದರು.
ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಆದಾಗ ನನ್ನ ಹೆಸರಿಗೆ ಕಳಂಕ ತರಲು ಹೊರಟಿದ್ದೀರಿ ಎಂದು ಕೂಗಾಡಿದ ಬಿಎಸ್ವೈ ಸಭೆಯಿಂದ ಹೊರ ನಡೆದಿದ್ದರು ಎಂದು ಹೇಳಿದರು.
ಅಲ್ಲದೇ ಬಿಜೆಪಿ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಲು ಹೋದರೆ, ಅಪ್ಪ-ಮಕ್ಕಳು ಪ್ರತಿಯೊಂದಕ್ಕೂ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ವೈ ಆರೋಪಿಸುತ್ತಾರೆ, ಇನ್ನು ಮುಂದಾದರೂ ಅಪ್ಪ-ಮಕ್ಕಳು ಎಂಬ ಪದ ಪ್ರಯೋಗವನ್ನು ನಿಲ್ಲಿಸಲಿ ಎಂದು ಅವರು ಆಗ್ರಹಿಸಿದ್ದಾರೆ. |