ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಇಂದು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಶಿವಕುಮಾರ್ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಕುರಿತು ಮಾತುಕತೆ ನಡೆಸಿದ್ದು,ಸಿದ್ದರಾಮಯ್ಯ ಅವರ ಮನವೊಲಿಕೆಗೆ ಪ್ರಯತ್ನ ನಡೆಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕರ ಹಾಗೂ ಪಕ್ಷದ ಕುರಿತು ಸಿದ್ದರಾಮಯ್ಯನವರು ಕಳೆದ ಕೆಲವು ತಿಂಗಳಿಂದ ಅಸಮಾಧಾನಗೊಂಡಿದ್ದಲ್ಲದೆ, ಇತ್ತೀಚೆಗೆ ಮಾರ್ಗರೆಟ್ ಆಳ್ವ ಹೇಳಿಕೆಗೆ ಸಹಮತ ನೀಡಿ ವಿವಾದ ಸೃಷ್ಟಿಸಿದ್ದರು.
ಇದೇ ವೇಳೆ ಚುನಾವಣೆ ಕುರಿತು ಇಬ್ಬರು ನಾಯಕರು ಸುದೀರ್ಘ ಚರ್ಚೆ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಸುವ ಅಭ್ಯರ್ಥಿಗಳ ಕುರಿತು ಸಿದ್ದರಾಮಯ್ಯ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. |