ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಗೌರವ ನೀಡಿರುವ ಕುರಿತು, ಶೀಘ್ರವೇ ಗೌರವ ಪ್ರತಿ ಸಲ್ಲಿಸುವಂತೆ ಬುಧವಾರ ಮದ್ರಾಸ್ ಹೈಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ.
ಶಾಸ್ತ್ರೀಯ ಸ್ಥಾನಮಾನಕ್ಕೆ ಶಿಫಾರಸು ಮಾಡಿರುವ ಸಮಿತಿಯನ್ನೇ ಪ್ರಶ್ನಿಸಿ ಚೆನ್ನೈನ ಆರ್.ಗಾಂಧಿ ಎಂಬವರು ಮದ್ರಾಸ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಏತನ್ಮಧ್ಯೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕೆಂಬ ಒತ್ತಡ ಹೆಚ್ಚುತ್ತಿರುವಂತೆಯೇ ಕೇಂದ್ರ ಸರ್ಕಾರ ಅಕ್ಟೋಬರ್ 31ರಂದು ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ಘೋಷಿಸಿತ್ತು.
ಇದೀಗ ಆರ್.ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸಿ, ಕನ್ನಡ, ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ಗೌರವ ನೀಡಿದ ಪ್ರತಿಯನ್ನು ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಅಲ್ಲದೇ ಈ ಕುರಿತು ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ.
ಇದರೊಂದಿಗೆ ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನ ವಿವಾದಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದ್ದು, ಚೆಂಡು ನ್ಯಾಯಾಲಯದ ಅಂಗಳದಲ್ಲಿದ್ದು, ಪ್ರಕರಣದ ಕುರಿತು ಯಾವ ತೆರನಾದ ತೀರ್ಪು ಹೊರಬೀಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. |