ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ವೈದ್ಯಾಧಿಕಾರಿಗಳೊಂದಿಗೆ ಸರ್ಕಾರದ ಸಂಧಾನ ಯಶಸ್ವಿಯಾದ ಪರಿಣಾಮ ಮುಷ್ಕರವನ್ನು ಹಿಂದಕ್ಕೆ ಪಡೆದಿರುವುದಾಗಿ ವೈದ್ಯಾಧಿಕಾರಿಗಳ ಸಂಘ ತಿಳಿಸಿದೆ.
ರಾಜ್ಯ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ರಾತ್ರಿ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಸಾರಿಗೆ ಸಚಿವ ಆರ್.ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಲಪ್ಪ ಮಾತುಕತೆ ನಡೆಸಿದ್ದರು.
ವೇತನ ಹೆಚ್ಚಳದ ಬೇಡಿಕೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ, ವೇತನ ತಾರತಮ್ಯ ಸರಿಪಡಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ ಎಂದು ಸಭೆಯ ನಂತರ ಸಂಘದ ಅಧ್ಯಕ್ಷ ಸತ್ಯನಾರಾಯಣ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಡಾ.ವಿ.ಎಸ್.ಆಚಾರ್ಯ ಮಾತನಾಡಿ ಕರ್ತವ್ಯ ನಿರತ ವೈದ್ಯರ ಮೇಲೆ ನಡೆಯುವ ಹಲ್ಲೆಯನ್ನು ತಡೆಗಟ್ಟುವ ಸಂಬಂಧವಾಗಿ ಕಾನೂನನ್ನು ರೂಪಿಸಲು ಮುಂದಿನ ಸಚಿವ ಸಂಪುಟದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಭರವಸೆ ನೀಡಿದರು. |