ರಾಜ್ಯದಲ್ಲಿ ಕಾಂಗ್ರೆಸ್ ಸಂಘಟಿಸುವಲ್ಲಿ ಎಲ್ಲಾ ಸ್ತರದ ಪದಾಧಿಕಾರಿಗಳೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡದಿದ್ದರೆ ಸ್ವಯಂ ನಿವೃತ್ತಿ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷಕ್ಕೆ ಕಾರ್ಯಕರ್ತರು, ಪದಾಧಿಕಾರಿಗಳೇ ಆಸ್ತಿ. ನಿಮ್ಮಿಂದ ಪಕ್ಷ ಬೆಳೆಯಬೇಕಾಗಿದೆ. ಕೆಳಸ್ತರದ ಪದಾಧಿಕಾರಿಗಳು ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಬೇಕು. ಆಗ ಮಾತ್ರ ಪಕ್ಷ ಬಲಿಷ್ಠವಾಗಲು ಸಾಧ್ಯ. ಒಂದು ವೇಳೆ ಪಕ್ಷ ಸಂಘಟಿಸಲು ಸಾಧ್ಯವಿಲ್ಲವೆಂದಾಗಿದ್ದರೆ ಸ್ವಯಂ ನಿವೃತ್ತಿ ಪಡೆಯಿರಿ ಎಂದಿದ್ದಾರೆ.
ಪಕ್ಷ ಕಟ್ಟುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ರಾಜ್ಯದಲ್ಲಿ ಕಾಂಗ್ರೆಸ್ನ್ನು ಬಲಪಡಿಸಿಬೇಕಿದೆ. ಅದು ಆಗದಿದ್ದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನನಗೂ ಅಧಿಕಾರವಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಪದಾಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.
ಅಧ್ಯಕ್ಷರ ಮಾತಿಗೆ ಧ್ವನಿಗೂಡಿಸಿದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ನೀವು ಕೈಕಟ್ಟಿ ಕುಳಿತರೆ ನಮ್ಮ ತಲೆ ಹೋಗುವುದು. ಹಾಗಾಗಿ ಪಕ್ಷದ ಸಂಘಟನೆಯಲ್ಲಿ ನೀವು ನಮ್ಮ ಕೈ ಬಲಪಡಿಸಬೇಕು ಎಂದು ಮನವಿ ಮಾಡಿಕೊಂಡರು.
|