ಒಂದು ಸಮಯದಲ್ಲಿ ಸೂಪರ್ ಕಾಪ್ ಎಂದೇ ಹೆಸರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ, ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಬಿಜೆಪಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಟೋಪಿ ಹಾಕುವ ಮೂಲಕ ಸೂಪರ್ ಕ್ಯಾಪ್ ಆದರು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣು ಒಪ್ಪಂದದ ಸಂದರ್ಭದಲ್ಲಿ ಪಕ್ಷದ ನಿರ್ಣಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಪರ ಮತ ಚಲಾಯಿಸಿದ ಸಾಂಗ್ಲಿಯಾನ ಅವರನ್ನು ಮತದಾರರು ಸೋಲಿಸಿವ ಮೂಲಕ ಸೂಪರ್ ಕಾಪ್ ಅನ್ನು ಈ ಚುನಾವಣೆಯಲ್ಲಿ ಸೂಪರ್ ಫ್ಲಾಪ್ ಮಾಡಲಿದ್ದಾರೆ ಎಂದರು.
ತಾವು ಶಾಸಕರಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ಅನುದಾನದ ಅಗತ್ಯವಿದೆ ಎಂದರು.
ಭಯೋತ್ಪಾದಕ ಆಫ್ಜಲ್ ಗುರುವಿಗೆ ಮರಣ ದಂಡನೆಗೆ ಒಳಪಡಿಸದೆ ಕೇಂದ್ರ ಸರ್ಕಾರ ಉಗ್ರಗಾಮಿಗಳಿಗೆ ರಕ್ಷಣೆ ನೀಡುತ್ತಿದೆ. ಈ ಮೂಲಕ ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರಲ್ಲದೆ ಈ ಬಾರಿ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು. |