ನಾಮಪತ್ರ ಸಲ್ಲಿಕೆಯ ನಂತರ ದೇವಸ್ಥಾನಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂಬ ಬಿಜೆಪಿ ಆರೋಪ ತಳ್ಳಿಹಾಕಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ, ಹೀಗೆ ಆರೋಪ ಹೊರಿಸುವ ಮೂಲಕ ಬಿಜೆಪಿ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ನಾಮಪತ್ರ ಸಲ್ಲಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಪೂಜಾರಿ ಅವರು ದೇವಾಲಯಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.
ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ದೇವಾಲಯಗಳಲ್ಲಿ ಪ್ರಚಾರ ಕಾರ್ಯ ನಡೆಸುವಷ್ಟು ಮೂರ್ಖ ಈ ಪೂಜಾರಿ ಅಲ್ಲ ಎಂದು ಸಮರ್ಥನೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಯಾವತ್ತಿಗೂ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯ ಮಾಡುವುದಿಲ್ಲ ಎಂದರು.
ಆದರೆ ಸುಳ್ಳು ಸುದ್ದಿ ಹಬ್ಬಿಸಲು ಮತ್ತು ಜನರನ್ನು ದಿಕ್ಕು ತಪ್ಪಿಸುವಲ್ಲಿ ಭಾರತೀಯ ಜನತಾ ಪಕ್ಷ ಪರಿಣತ ರಾಜಕೀಯ ಪಕ್ಷವಾಗಿದೆ ಎಂದು ಲೇವಡಿ ಮಾಡಿದರು. ಸ್ವತಃ ಬಿಜೆಪಿ ಅಭ್ಯರ್ಥಿಯೇ ದೇವಾಲಯಗಳಲ್ಲಿ ಪೂಜೆ, ಚಂಡಿಕಾ ಹೋಮಗಳನ್ನು ನಡೆಸಿ ಮತದಾರರನ್ನು ಸೆಳೆಯುವ ಕೀಳುಮಟ್ಟದ ತಂತ್ರಕ್ಕೆ ಇಳಿದಿದೆ ಎಂದು ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಯಾವತ್ತಿಗೂ ಅಷ್ಟು ಕೆಳ ಮಟ್ಟದ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.
ಈಗಾಗಲೇ ರಾಜ್ಯದ ಹಲವೆಡೆ ಆಡಳಿತಾರೂಢ ಬಿಜೆಪಿ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿರುವುದು ಬಹಿರಂಗವಾಗಿದೆ. ಅಷ್ಟೇ ಅಲ್ಲ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ಮಾಜಿ ಪ್ರಧಾನಿ ದೇವೇಗೌಡರೇ ಸ್ವತಃ ಬಿಜೆಪಿ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ. ಬಿಜೆಪಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಪ್ರಕಟಿಸಬೇಕು ಎಂದು ಸಲಹೆಯನ್ನು ಈ ಸಂದರ್ಭದಲ್ಲಿ ನೀಡಿದರು. |