ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಜಾರಿಗೆ ತಂದ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಯಂತಹ ಜನಪರ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ಕಾರ್ಯಕ್ರಮಗಳು ಎಂದು ಬಿಂಬಿಸಿ ಬೀದಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶವನ್ನು ಆಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜ್ಯದ ಅಭಿವೃದ್ದಿಗೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರಲ್ಲದೆ, ರಾಜ್ಯದ ರೈತರ ಸಮಸ್ಯೆ, ನೀರಾವರಿ ಹಾಗೂ ಅತಿವೃಷ್ಟಿ, ಅನಾವೃಷ್ಟಿ ಉಂಟಾದಾಗ ರಾಜ್ಯಕ್ಕೆ ಅಗತ್ಯ ನೆರವು ನೀಡುವಲ್ಲಿ ಈ ಪಕ್ಷಗಳು ವಿಫಲವಾಗಿವೆ ಎಂದು ಟೀಕಿಸಿದರು.
ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿರುವ ಬಗ್ಗೆ ಕಟುವಾಗಿ ಟೀಕಿಸಿದರು. ರೈತರಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಕುಮಾರಸ್ವಾಮಿ, ನಮ್ಮ ರೈತರಿಗೆ ನಿಮ್ಮ ರಕ್ತ ಬೇಡ ಸ್ವಾಮಿ, ರೈತರು ಬೆಳೆಯುವ ಬೆಳೆಗಳಿಗೆ ತಾವು ಸೂಕ್ತ ಬೆಂಬಲ ಬೆಲೆ ನೀಡಿ ಸಾಕು ಎಂದರು.
|