ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಬಿಜೆಪಿ ಪರ ಚುನಾವಣೆ ಪ್ರಚಾರ ಮಾಡಿವುದಾಗಿ ಹೇಳಿದ್ದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಇದೀಗ ಪ್ರಚಾರಕ್ಕೆ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕರು ಕರೆದಿಲ್ಲ ಎಂದು ಹೊಸ ವರಸೆ ಪ್ರಾರಂಭಿಸಿದ್ದಾರೆ.
ಬಿಜೆಪಿ ಪರ ಪ್ರಚಾರ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಾಗಲೀ ಇತರ ನಾಯಕರಾಗಲೀ ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬರುವಂತೆ ಕರೆದಿಲ್ಲ. ಮುಂದಿನ ಎರಡು ದಿನಗಳವರೆಗೆ ಕಾದು ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವರ್ತೂರು ಪ್ರಕಾಶ್ ಅವರ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಹಂತದ ಚುನಾವಣೆ ಪ್ರಚಾರಕ್ಕೆ 10 ದಿನಗಳು ಬಾಕಿ ಇರುವಾಗ ವರ್ತೂರು ಪ್ರಕಾಶ್ ಅವರ ಈ ವರಸೆ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಸಿಎಂಗೆ ದೂರು: ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರಕ್ಕೆ ಆಹ್ವಾನಿಸಿದ್ದರೂ ಸ್ಪಂದಿಸದೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಮುಖ್ಯಮಂತ್ರಿಗೆ ದೂರು ಸಲ್ಲಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎಸ್.ವೀರಯ್ಯ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಎರಡು-ಮೂರು ಬಾರಿ ವರ್ತೂರು ಪ್ರಕಾಶ್ ಜೊತೆ ಮಾತನಾಡಿ, ಪ್ರಚಾರಕ್ಕೆ ಆಹ್ವಾನಿಸಿದ್ದಾರೆ. ಆದರೂ ಅವರು ಬರಲಿಲ್ಲ ಎಂದು ಅವರು ಹೇಳಿದ್ದಾರೆ. |