ಸೋಲಿನ ಭೀತಿ ಎದುರಿಸುತ್ತಿರುವ ಬೆಜೆಪಿಯು ತೀವ್ರ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ ಎಂದು ದೂರಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷವು ತನ್ನ ಮಂತ್ರಿಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಬೆದರಿಕೆಯೊಡ್ಡುತ್ತಿದೆ ಎಂದು ಹೇಳಿದ್ದಾರೆ. "ಪಕ್ಷಕ್ಕಾಗಿ ದುಡಿಯದಿದ್ದರೆ ನಿಮ್ಮ ಸ್ಥಾನ ಕಳೆದುಕೊಳ್ಳಲಿದ್ದೀರಿ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ ಅವರು ಹತಾಶ ಸ್ಥಿತಿಗೆ ತಲುಪಿರುವ ಕಾರಣ ಅಧಿಕಾರ ದುರುಪಯೋಗ ನಡೆಸಲು ಮುಖ್ಯಮಂತ್ರಿಗಳೇ ಅನುಮತಿ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.ಈ ಅಧ್ಯಕ್ಷರು, ಸಚಿವರುಗಳ ಚಲನವಲನಗಳ ಮೇಲೆ ನಿಗಾ ಇಡಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಶಿವಕುಮಾರ್ ಹೇಳಿದ್ದಾರೆ. ಇದೇವೇಳೆ ಕಾಂಗ್ರೆಸ್ ಪಕ್ಷವು ಚುನಾವಣಾ ನೀತಿ ಸಂಹಿತೆಗೆ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.ಬಿಜೆಪಿ ಅಧಿಕಾರವಿರುವ ಗುಜಾರಾತ್ ಹಾಗೂ ಮಧ್ಯಪ್ರದೇಶಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಸರಬರಾಜಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ. ಅಲ್ಲದೆ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಅವರು ಕಳ್ಳಸಾಗಾಣೆ ಮೂಲಕ ಮದ್ಯ ಪೂರೈಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಅವರು ಈ ಸಂದರ್ಭದಲ್ಲಿ ಮಾಡಿದ್ದಾರೆ. ಅಲ್ಲದೆ ಈ ಕುರಿತು ಸಿಓಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. |