ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳಒಪ್ಪಂದ ನಡೆದಿದೆ ಎಂಬ ಬಿಜೆಪಿಯ ಆರೋಪಕ್ಕೆ ಪುಷ್ಠಿ ನೀಡುವಂತ ಬೆಳವಣಿಗೆಗಳು ನಡೆದಿದ್ದು, ದಾವಣಗೆರೆಯ ಜೆಡಿಎಸ್ ಅಭ್ಯರ್ಥಿ ಕಲ್ಲೇ ರುದ್ರೇಶಪ್ಪ ಅವರನ್ನು ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸಲಾಗಿದೆ.
ಜಾತ್ಯತೀತ ಮತಗಳು ಒಡೆಯದಿರುವಂತೆ ತಡೆಯುವ ನಿಟ್ಟಿನಲ್ಲಿ ದೇವೇ ಗೌಡರು ತಮ್ಮ ಪಕ್ಷದ ಅಭ್ಯರ್ಥಿಯನ್ನು ಸ್ಫರ್ಧೆಯಿಂದ ಹಿಂಸರಿಯುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಚ್.ಎನ್. ಶಿವಶಂಕರ್ ಈ ವಿಚಾರವನ್ನು ಸ್ಪಷ್ಟಪಡಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಸೂಚನೆಯ ಮೇಲೆ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಗೌಡರನ್ನು ವಿನಂತಿಸಿಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.
ಜೆಡಿಎಸ್ನ ಈ ಕ್ರಮದಿಂದಾಗಿ ಇದೀಗ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಫರ್ಧೆ ನಡೆಯಲಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲಿ ಎರಡನೆ ಸ್ಥಾನಗಳಿಸಿದ್ದು ಕಾಂಗ್ರೆಸನ್ನು ತೃತೀಯ ಸ್ಥಾನಕ್ಕೆ ತಳ್ಳಿತ್ತು. |