ಕಳೆದ 10 ತಿಂಗಳು ನಾವು ಸಾಧಿಸಿರುವ ಅಭೂತ ಪೂರ್ವ ಜನಪರ ಕಾರ್ಯಗಳೇ ಲೋಕಸಭಾ ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿದ್ದು, ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಜಯಶಾಲಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಯುಪಿಎ ಸರ್ಕಾರದ ವೈಫಲ್ಯದ ಪರಿಣಾಮ, ಭಯೋತ್ಪಾದನೆ ತಡೆಯುವಲ್ಲಿ ವಿಫಲವಾಗಿದೆ. ಅದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ ಎಂದರು.
ರಾಜ್ಯದಲ್ಲಿ ತಮ್ಮ ಆಡಳಿತಾವಧಿಯಲ್ಲಿ 18 ಲಕ್ಷ ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್, ಅರ್ಹ ಬಡಜನತೆಗಾಗಿ 20 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು 19 ರೂ. ನಂತೆ ಖರೀದಿ ಮಾಡಿ 3 ರೂ.ಗಳಂತೆ ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುತ್ತಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ 1 ಲೀಟರ್ ಹಾಲಿಗೆ 2 ರೂ. ಪ್ರೋತ್ಸಾಹ ಧನ ನೀಡುವುದಾಗಿಯೂ, ರೈತರಿಗೆ ಶೇ. 3 ರೂ.ನಂತೆ ಸಾಲ ನೀಡುತ್ತಿರುಗವುದಾಗಿ ತಿಳಿಸಿದ ಅವರು, ಬಡ ಕುಟುಂಬದಲ್ಲಿ ಜನಿಸಿದ ಹೆಣ್ಣುಮಕ್ಕಳಿಗೆ ಸಾವಿರ ರೂ.ಗಳ ಠೇವಣಿಯ ಬಾಂಡ್ ನೀಡಿ 18 ವರ್ಷ ವಯಸ್ಸಿಗೆ ಬರುವಂತೆ ಭಾಗ್ಯಲಕ್ಷ್ಮಿ ಯೋಜನೆ ಪ್ರಾರಂಭಿಸಿರುವುದಾಗಿ ತಿಳಿಸಿದರು. ಈ ಎಲ್ಲ ಸಾಧನೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗಳಿಸಲಿದೆ ಎಂದರು.
|