ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ ಎಂಬ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಧಾನಪರಿಷತ್ ಸದಸ್ಯ ಮನೋಹರ ಮಸ್ಕಿ ಅವರನ್ನು ಸುರಪುರ ಪೊಲೀಸರು ಸೋಮವಾರ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
ಯಾದಗಿರಿ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 118ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಂದರ್ಭದಲ್ಲಿ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮಸ್ಕಿ ಅವರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಯನ್ ಅವರು ತಿಳಿಸಿದ್ದಾರೆ.
ಮಸ್ಕಿ ಅವರು ವಿವಾದಿತ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ವಿವಿಧ ದಲಿತಪರ ಸಂಘಟನೆಗಳು ಕಲ್ಬುರ್ಗಿ, ಜೇವರ್ಗಿ, ಶಹಾಪೂರ, ಸುರಪುರ, ಯಾದಗಿರಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿ ಮಸ್ಕಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಹಲವೆಡೆ ಹಿಂಸಾಚಾರ ಸಂಭವಿಸಿದೆ.
ದಿನ್ನಿಯಿಂದ ರಾಯಚೂರಿಗೆ ಬರುತ್ತಿರುವ ಬಸ್ ಅನ್ನು ರಾಂಪುರ ಗ್ರಾಮದ ಹತ್ತಿರ ತಡೆದು ಮೂವರು ಕಿಡಿಗೇಡಿಗಳು ಬಸ್ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. |