ಮಂಗಳೂರು ಎಮ್ಮೇಶಿಯಾ ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ರೇಣುಕ ಚೌಧರಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಇಲ್ಲಿನ ಸ್ಥಳೀಯ ನ್ಯಾಯಾಲಯ ಪೊಲೀಸರಿಗೆ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.ಪಬ್ನಲ್ಲಿ ಅಶ್ಲೀಲ ನರ್ತನ ನಡೆಯುತ್ತಿದೆ ಎಂದು ಆರೋಪಿಸಿ ಶ್ರೀರಾಮಸೇನೆ ದಾಳಿ ನಡೆಸುವ ಮೂಲಕ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಸಂದರ್ಭದಲ್ಲಿ ಮಂಗಳೂರು ತಾಲಿಬಾನೀಕರಣಗೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ರೇಣುಕ ಚೌಧರಿ ವಾಗ್ದಾಳಿ ನಡೆಸಿದ್ದರು.ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬೃಂಗೇಶ್ ಅವರು, ಚೌಧರಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಬೇಕೆಂಬ ಕೋರಿಕೆಗೆ ಅವಕಾಶ ಕಲ್ಪಿಸಿದ್ದಾರೆ.ಚೌಧರಿ ವಿರುದ್ಧ ಆರೋಪಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನೀಡಿದ ಅಂತಿಮ ಗಡುವು ಸೋಮವಾರ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಮೊರೆಹೋಗಿ ಹೆಚ್ಚುವರಿ ಕಾಲಾವಕಾಶ ಪಡೆದುಕೊಂಡಿರುವುದಾಗಿ ವಿವರಿಸಿದ್ದಾರೆ.ಚೌಧರಿ ಹೇಳಿಕೆ ವಿರುದ್ಧ ಮಂಗಳೂರು ಮೇಯರ್ ಗಣೇಶ್ ಹೊಸಬೆಟ್ಟು ಸೇರಿದಂತೆ ನಾಲ್ವರು ಮಂದಿ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ಸಲ್ಲಿಸಿದ್ದರು. ಅದರಂತೆ ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದ ನಂತರ ಮಾರ್ಚ್ 16ರಂದು ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. |