ಪ್ರಧಾನಿ ಡಾ.ಮನಮೋಹನ್ ಸಿಂಗ್ ಅತ್ಯಂತ ದುರ್ಬಲ ಪ್ರಧಾನಿ ಎಂಬ ಬಿಜೆಪಿ ಟೀಕಾಪ್ರಹಾರ ನಡೆಸಿದ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರದಲ್ಲಿ ಗಿನ್ನೆಸ್ ಪುಸ್ತಕದಲ್ಲಿ ದಾಖಲೆ ಮಾಡುವ ಮುಖ್ಯಮಂತ್ರಿ ಅವರಾಗಿದ್ದಾರೆ ಎಂದು ಮಂಗಳವಾರ ಯಲಹಂಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ ಅವರು, ಅಧಿಕಾರಕ್ಕೆ ಬಂದ 3-4ತಿಂಗಳಲ್ಲಿ 14ಸಾವಿರ ವರ್ಗಾವಣೆಗಳನ್ನು ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಕರ್ನಾಟಕ ಮೊದಲನೇ ಸ್ಥಾನ ಪಡೆದಿದೆ ಎಂದರು.
ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸುಮಾರು 30ಸಾವಿರ ಕೋಟಿ ರೂ.ಅನುದಾನವನ್ನು ಇಂದಿಗೂ ಖರ್ಚು ಮಾಡಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಟಿಕೆಟ್ ಪಡೆಯಲು ಅರ್ಹರೆಂದು ನಿರ್ಧರಿಸಿದ್ದ ವ್ಯಕ್ತಿಗಳಿಗೆ ಬಿಜೆಪಿ ಆಹ್ವಾನಿಸಿ ಟಿಕೆಟ್ ನೀಡಿದ್ದು, ಇದು ಅವರ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಅಂತಹ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ. |