ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡು ಚರ್ಚ್ ಹಾಗೂ ಮಸೀದಿ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಪಕ್ಷಕ್ಕೆ ಮತ ಹಾಕಬೇಡಿ ಎಂದು ಅಲ್ಪಸಂಖ್ಯಾತ ವರಿಷ್ಠರು ಫತ್ವಾ ಹೊರಡಿಸಿದ್ದಾರೆ!
ಸಿಎನ್ಎನ್-ಐಬಿಎನ್ ಚಾನೆಲ್ ಜತೆ ಮಾತನಾಡಿದ ಅಬ್ದುಲ್ ಮಸೂದ್, ಆಡಳಿತರೂಢ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘಪರಿವಾರ ಸಾಕಷ್ಟು ಅನಾಹುತವನ್ನು ಸೃಷ್ಟಿಸಿದೆ. ಅಲ್ಲದೇ ಹಿಂದುತ್ವವನ್ನೇ ಪ್ರಮುಖವಾಗಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಎತ್ತಿಕಟ್ಟಿ ಸಮಾಜದಲ್ಲಿ ಸಾಮರಸ್ಯ ಕೆಡಿಸಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ಫತ್ವಾ ಹೊರಡಿಸಿರುವುದು ಹೌದೆಂದು ವಿವರಿಸಿದ್ದಾರೆ.
ಅದೇ ರೀತಿ ರಾಜ್ಯದಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಮಂದಿರ, ಚರ್ಚ್ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಿರುವ ಕುರಿತಾಗಿಯೂ ಫಾದರ್ ಅಡಾಲ್ಫ್ ವಾಷಿಂಗ್ಟನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮುದಾಯ ಕೂಡ ಕೋಮುವಾದಿ ಭಾರತೀಯ ಜನತಾ ಪಕ್ಷದ ವಿರುದ್ಧ ಮತಚಲಾಯಿಸುವಂತೆ ಸೂಚನೆ ನೀಡಿರುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು.
ರಾಜ್ಯದಲ್ಲಿ ಪ್ರಥಮ ಹಂತದ ಚುನಾವಣೆ ನಡೆಯಲು ಕ್ಷಣಗಣನೆ ಆರಂಭವಾಗಿದ್ದು, ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಗಿಮಿಕ್ ನಡೆಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ಬಹಿರಂಗವಾಗಿ ಫತ್ವಾ ಹೊರಡಿಸಿರುವುದು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. |