ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಅಡ್ಡಗಾಲು ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆ ವರ್ಗದ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಜಗಳೂರು ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಪರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದುಳಿದವರ ಮೀಸಲಾತಿ ಪ್ರಶ್ನಿಸಿ ರಾಜ್ಯಸಭಾ ಸದಸ್ಯ ರಾಮಾ ಜೋಯಿಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಇದಕ್ಕೆ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಅವರ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.
ರಾಜಕೀಯ ಮೀಸಲಾತಿ ಪರಿಣಾಮ ಗ್ರಾಮಪಂಚಾಯ್ತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿಯಲ್ಲಿ ಹಿಂದುಳಿದ ವರ್ಗದ ಜನರು ಚುನಾಯಿತರಾಗುತ್ತಿದ್ದಾರೆ. ಪರಿಶಿಷ್ಟರು ಸೇರಿದಂತೆ ಮುಂದುವರಿದ ಬಡವರಿಗೂ ಮೀಸಲಾತಿ ಕಲ್ಪಿಸಲಾಗಿತ್ತು. ಅದನ್ನೇ ಪ್ರಶ್ನಿಸುವ ಮೂಲಕ ಯಡಿಯೂರಪ್ಪ ಅವರ ಗೋಸುಂಬೆತನ ಬಯಲಾಗಿದೆ ಎಂದು ದೂರಿದರು. |