ದೇಶದ ಪ್ರತಿ ಬಡವರ ಬದುಕು ಪ್ರಕಾಶಿಸಬೇಕು. ಒಬ್ಬ ವ್ಯಕ್ತಿ ಬಡವನಾಗಿ ಉಳಿದರು ಭಾರತ ಪ್ರಕಾಶಿಸಲು ಸಾಧ್ಯವಿಲ್ಲ-ಹೀಗೆಂದವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ.
ನಗರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್ಡಿಎ ಸರ್ಕಾರದ ಆಡಳಿತದಲ್ಲಿ ದೇಶದ ಕೆಲವರ ಬದುಕು ಮಾತ್ರ ಪ್ರಕಾಶಿಸುತ್ತಿತ್ತು. ಬಡವರು ಇನ್ನಷ್ಟು ಬಡವರಾದರು. ಆದರೂ ಭಾರತ ಪ್ರಕಾಶಿಸುತ್ತಿದೆ ಎಂಬ ಘೋಷಣೆಯ ಮೂಲಕ ಜನರನ್ನು ಮರಳು ಮಾಡಿದರು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಆದರೆ ಯುಪಿಎ ಕಳೆದ ಐದು ವರ್ಷಗಳ ಅವಧಿಯಲ್ಲಿ ಬಡವರು, ಹಿಂದುಳಿದ ವರ್ಗಗಳ, ಆದಿವಾಸಿಗಳ ಸರ್ಕಾರವಾಗಿ ಕಾರ್ಯ ನಿರ್ವಹಿಸಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಬಡವರ ಮತ್ತು ಜನತೆಯ ಹಿತದೃಷ್ಟಿಯಿಂದ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಈಡೇರಿಸಿದ ಸರ್ಕಾರ ಬೇರೊಂದಿಲ್ಲ. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಭಾಗದ ಬಡಜನರಿಗೆ ವರ್ಷದಲ್ಲಿ 100 ದಿನಗಳ ಉದ್ಯೋಗ ಖಾತರಿಗೊಳಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ನಿರುದ್ಯೋಗಿ ಯುವಕರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ, 2 ರೂ.ಗೆ ಅಕ್ಕಿ, 24 ಗಂಟೆ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಳೆದ 10 ತಿಂಗಳಲ್ಲಿ ಯಾವುದನ್ನು ಜಾರಿಗೆ ತರದೆ ಜನತೆಗೆ ದ್ರೋಹವೆಸಗಿಸಿದ್ದಾರೆ ಎಂದು ದೂರಿದರು. |