ರಾಜ್ಯದ 17 ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮಂದಗತಿಯ ಮತದಾನಕ್ಕೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇಲ್ಲಿನ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಮತದಾರರಿಗೆ ಸರಿಯಾಗಿ ಸ್ಪಂದಿಸಿಲ್ಲ ಹಾಗೂ ಅವರ ಮೇಲೆ ದೌರ್ಜನ್ಯ ಪ್ರವೃತ್ತಿ ತೋರಿಸಿದರ ಹಿನ್ನೆಲ್ಲೆಯಲ್ಲಿ ಮತದಾನ ನೀರಸವಾಗಿದೆ ಎಂದು ಹೇಳಿದರು.
ಕೆಲವು ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ, ಗುರುತಿನ ಚೀಟಿ ಇದ್ದರೂ ಮತದಾನಕ್ಕೆ ಅವಕಾಶ ಸಿಗದಿರುವುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ, ಇವೆಲ್ಲಾ ಚುನಾವಣಾ ಆಯೋಗದ ಬೇಜವ್ದಾರಿತನ ಎದ್ದು ಕಾಣುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಳಿದ 11 ಕ್ಷೇತ್ರಗಳಿಗೆ ನಡೆಯಲಿರುವ ಎರಡನೆ ಹಂತದ ಚುನಾವಣೆಯಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕು, ಒಂದೊಂದು ಮತವು ಅತ್ಯಮೂಲ್ಯವಾದದ್ದು ಹಾಗಾಗಿ ಎಲ್ಲಾ ಮತದಾರರು ಕಡ್ಡಾಯವಾಗಿ ಮತಚಲಾಯಿಸಿ ಎಂದು ಅವರು ತಿಳಿಸಿದರು. |