ಯುಪಿಎನಿಂದ ಮಾತ್ರ ಸ್ಥಿರ ಮತ್ತು ಜಾತ್ಯತೀತ ಸರ್ಕಾರ ನೀಡಲು ಸಾಧ್ಯ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ ಪರ ಪ್ರಚಾರದ ಅಂಗವಾಗಿ ಭಾನುವಾರ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದ್ದು, ಬ್ಯಾಂಕ್ ರಾಷ್ಟ್ರೀಕರಣ ಮಾಡಿರುವುದು ಕಾಂಗ್ರೆಸ್ ಸಾಧನೆ ಎಂದು ಬಣ್ಣಿಸಿದ ಸೋನಿಯಾ, ಪಂಜಾಯತ್ ರಾಜ್ ಯೋಜನೆಯ ಮೂಲಕ ದೇಶದ ಹಳ್ಳಿ, ಹಳ್ಳಿಗಳನ್ನು ಅಭಿವೃದ್ದಿಗೆ ಮುಂದಾಗಿರುವುದಾಗಿ ಹೇಳಿದರು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಈ ಸಂದರ್ಭದಲ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಪಾಲ್ಗೊಂಡ ಈ ಸಮಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಹೊತ್ತಿರುವ ಗುಲಾಂ ನಬಿ ಆಜಾದ್, ಪ್ರಚಾರ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾಗವಹಿಸಿದ್ದರು.
ಬಿಗಿ ಬಂದೋಬಸ್ತ್: ಸೋನಿಯಾ ಪ್ರಚಾರದ ಸಭೆಯ ಅಂಗವಾಗಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಳೆದ ಮೂರು ದಿನಗಳಿಂದ ನೆಹರೂ ಮೈದಾನ ಸುತ್ತಮುತ್ತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿ ಭಾನುವಾರ ಮಾರ್ಪಾಡು ಮಾಡಲಾಗಿತ್ತು. |