ತೀವ್ರ ವಿವಾದಕ್ಕೆ ಕಾರಣವಾಗಿರುವ ಓಬಳಾಪುರಂ ಗಣಿಗಾರಿಕೆಯ ರದ್ದತಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ನೀಡಿದ ಬೆನ್ನಲ್ಲೆ ಗಣಿಗಾರಿಕೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಸಂಸ್ಥೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ. ಕಾನೂನು ಉಲ್ಲಂಘಿಸುವಂತ ಯಾವುದೇ ಕಾರ್ಯವನ್ನು ತಾವು ಮಾಡಿಲ್ಲವಾದ್ದರಿಂದ ಚಟುವಟಿಕೆ ಸ್ಥಗಿತಗೊಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ತಿಳಿಸಿದ್ದಾರೆ.ಈ ಬಗ್ಗೆ ಕೇಂದ್ರ ಸರ್ಕಾರ ತಮ್ಮ ಮಾಲೀಕತ್ವದ ಓಎಂಸಿ ಸೇರಿದಂತೆ ಐದು ಗಣಿಗಾರಿಕೆ ಸಂಸ್ಥೆಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿರುವ ಪತ್ರ ತಮಗೆ ತಲುಪಿಲ್ಲ ಎಂದು ತಿಳಿಸಿದ್ದಾರೆ.ಏಪ್ರಿಲ್ 22ರಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರಕ್ಕೆ ಉತ್ತರವಾಗಿ ಏಪ್ರಿಲ್ 25ರಂದು ಆಂಧ್ರ ವಾಣಿಜ್ಯ, ಕೈಗಾರಿಕೆ ಇಲಾಖೆ ಲಿಖಿತವಾಗಿ ಪ್ರತಿಕ್ರಿಯಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಈ ಮಧ್ಯೆ ರೆಡ್ಡಿ ಸಹೋದರರಾದ ಜನಾರ್ದನ ರೆಡ್ಡಿ, ಕರುಣಾಕರರೆಡ್ಡಿ ಮತ್ತು ಶ್ರೀರಾಮುಲು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದ್ದು, ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. |