ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಬಿ.ಜೆ. ನಂದಕುಮಾರ್ ಅವರು ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದಿಂದ ಬಿಜೆಪಿ ಮುಖಭಂಗವಾಗಿದೆ.
ಐಎಎಸ್ ಅಧಿಕಾರಿಯಾಗಿರುವ ಅವರು ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯಲ್ಲಿದ್ದ ಸಂದರ್ಭದಲ್ಲಿ ಇದನ್ನು ಅರಿತ ಕಾಂಗ್ರೆಸ್, ಜೆಡಿಎಸ್ ಹಾಗೂ ಸಿಪಿಐ ಮುಖಂಡರು ಮನೆ ಮುಂದೆ ಪ್ರತಿಭಟನೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಆಯೋಗದ ಅಧಿಕಾರಿಗಳು ನಂದಕುಮಾರ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನಂದ ಕುಮಾರ್ ಅವರು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಲ್ಲದೆ, ಮತದಾರರಿಗೆ ಹಣ ಹಂಚುವ ಕಾರ್ಯದಲ್ಲಿ ಇವರನ್ನು ಬಳಸಿಕೊಳ್ಳಲಾಗಿತ್ತು ಎಂದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ.
ಈ ಮಧ್ಯೆ ನಂದ ಕುಮಾರ್ ಅವರು ಆರೋಪವನ್ನು ನಿರಾಕರಿಸಿದ್ದು, ಭಾನುವಾರ ರಜಾ ದಿನವಾಗಿದ್ದರಿಂದ ಕುಟುಂಬ ಸಮೇತವಾಗಿ ಸ್ವಗ್ರಾಮಕ್ಕೆ ತೆರಳಿದ್ದೆ. ಆ ಸಂದರ್ಭದಲ್ಲಿ ಸ್ನೇಹಿತರೊಂದಿಗೆ ಮಾತುಕತೆ ನಡೆಸುತ್ತಿದ್ದೆ, ವಿನಹ ಯಾವುದೇ ಪ್ರಚಾರದಲ್ಲಿ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. |