ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಬಿಜೆಪಿ ನರೇಂದ್ರ ಮೋದಿಯನ್ನು ಸಿಎಂ ಗಾದಿಯಿಂದ ವಜಾಗೊಳಿಸಬೇಕು ಇಲ್ಲವೇ ರಾಜೀನಾಮೆಯನ್ನು ಪಡೆಯಬೇಕು ಎಂದು ಸವಾಲು ಹಾಕಿದ್ದಾರೆ.
ಗುಜರಾತ್ ಗಲಭೆಗಳಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರ ಇದೆಯೇ ಎಂಬ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಸರ್ವೋಚ್ಚ ನ್ಯಾಯಾಲಯ ರಾಘವನ್ ಸಮಿತಿಗೆ ತಿಳಿಸಿದ್ದು, ಮುಂದಿನ ಮೂರು ತಿಂಗಳ ಒಳಗಾಗಿ ವರದಿ ಒಪ್ಪಿಸುವಂತೆ ಸೂಚಿಸಿತ್ತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಆಗಲಿ, ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳವಷ್ಟು ಧೈರ್ಯ ಬಿಜೆಪಿಗಿಲ್ಲ ಎಂದು ಕಟುವಾಗಿ ಟೀಕಿಸಿದರು.
ಬಳ್ಳಾರಿಯಲ್ಲಿನ ಓಬಳಾಪುರಂ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರ ತಡೆ ನೀಡಿದ್ದರೂ ಕೂಡ, ತಾನು ಗಣಿಗಾರಿಕೆಯನ್ನು ನಿಲ್ಲಿಸುವುದಿಲ್ಲ ಎಂಬ ಉದ್ದಟತನದ ಧೋರಣೆ ಅನುಸರಿಸುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮೌನ ವಹಿಸಿದ್ದಾರೆ ಎಂಬುದಾಗಿ ದೂರಿದರು.
ಕಳೆದ ಐದು ವರ್ಷಗಳಿಂದ ಕೇಂದ್ರದ ಯುಪಿಎ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಗಣನೀಯ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಿದ ಎಂದ ಮೊಯ್ಲಿ, ಆರು ವರ್ಷಗಳ ಕಾಲ ಆಡಳಿತ ನಡೆಸಿದ ಎನ್ಡಿಎ ಯಾವ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ದೂಷಿಸಿದರು.
ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ದುರ್ಬಲ ಎಂದು ಜರೆದಿರುವ ಅವರು, ಅಫ್ಜಲ್ ಗುರು ಗಲ್ಲು ಶಿಕ್ಷೆ ವಿಷಯವನ್ನೇ ರಾಜಕೀಯವಾಗಿ ವಿವಾದಕ್ಕೀಡು ಮಾಡುತ್ತಿರುವ ಬಿಜೆಪಿ ಎನ್ಡಿಎ ಆಡಳಿತಾವಧಿಯಲ್ಲಿ 23ಗಲ್ಲು ಶಿಕ್ಷೆ ಪ್ರಕರಣದಲ್ಲಿ 21ಮನವಿಯನ್ನು ಮೂಲೆಯಲ್ಲಿಟ್ಟಿತ್ತು ಎಂದು ಆರೋಪಿಸಿದರು. ಕೇವಲ ರಾಜಕೀಯಕ್ಕಾಗಿಯೇ ಕಪ್ಪು ಹಣದ ವಿಷಯವನ್ನು ಪ್ರಸ್ತಾಪಿಸುತ್ತಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು. |