ಚುನಾವಣಾ ಆಯೋಗದ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇಂದ್ರದ ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಅವಧಿ ಮೀರಿದ ನಂತರ ಹೋಟೆಲ್ನಲ್ಲಿ ತಂಗಲು ಅವಕಾಶ ನೀಡಿದ ಹೋಟೆಲ್ ಮಾಲೀಕನ ವಿರುದ್ಧವು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆರ್ಪಿಐ ಸೆಕ್ಷನ್ 136ರ ಅನ್ವಯ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ.
ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ ಅವರು ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಲವಡೆ ಪ್ರವಾಸಕೈಗೊಂಡು ಬಂಗಾರಪ್ಪ ಅವರ ಪರ ಪ್ರಚಾರ ಕೈಗೊಂಡು ಮಂಗಳವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲ್ವೊಂದರಲ್ಲಿ ತಂಗಿದ್ದರು. ಇದನ್ನು ಅರಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಶಿವಮೊಗ್ಗ ಜಿಲ್ಲೆಯಿಂದ ಹೊರ ಹೋಗುವಂತೆ ಆಳ್ವ ಅವರಿಗೆ ಸೂಚಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾರ್ಗರೇಟ್ ಆಳ್ವ, ಜಿಲ್ಲೆಯಲ್ಲಿರುವ ಅಧಿಕಾರಿಗಳು ಬಿಜೆಪಿ ಪರ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಗೊಂಬೆಯಾಗಿದ್ದಾರೆ ಎಂದು ಟೀಕಿಸಿದರು. |