ಜೆಡಿಎಸ್ ಮುಖಂಡ ವಿಜಯ್ ಕುಮಾರ್ ಕೊಂಡಜ್ಜಿ ಸಾವಿನ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿವೆ ಎಂದು ಕಂದಾಯ ಸಚಿವ ಕರುಣಾಕರ ರೆಡ್ಡಿ ದೂರಿದರು.
ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷಣೆಯಿಂದಾಗಿ ಕೊಂಡಜ್ಜಿ ಅವರು ಸಾವನ್ನಪ್ಪಿರುವುದು ನಮಗೂ ನೋವಾಗಿದೆ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ಇದಕ್ಕೆ ರಾಜಕೀಯ ಬಣ್ಣ ಬಳಿದು ರಾಜ್ಯದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಪಿತೂರಿ ನಡೆಸುತ್ತಿವೆ. ಇದು ಖಂಡನಾರ್ಹ ಎಂದು ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ನಿಜ. ಆದರೆ, ಪ್ರಕರಣವನ್ನು ದೊಡ್ಡದು ಮಾಡಿ ವಿನಾಕಾರಣ ಗೊಂದಲ ಸೃಷ್ಟಿಸಬೇಡಿ ಎಂದು ಜೆಡಿಎಸ್ ಮುಖಂಡರಲ್ಲಿ ಅವರು ಮನವಿ ಮಾಡಿದರು.
ವಿಜಯ್ ಕುಮಾರ್ ತಿಂಗಳ ಹಿಂದೆಯಷ್ಟೇ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯುವಾಗ ಶಾಸಕ ಬಿ.ಪಿ.ಹರೀಶ್ ಪರಿಸ್ಥಿತಿ ತಿಳಿಗೊಳಿಸಿ, ವಾಪಸ್ ಹೋಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಬಳಿಕ ಉದ್ವೇಗಕ್ಕೆ ಒಳಗಾಗಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. |