ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಜನಸಂಖ್ಯೆ ಪ್ರಮಾಣ, ವ್ಯಾಪ್ತಿ, ವಾರ್ಡ್ ವಿಂಗಡಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇನ್ನೆರಡು ದಿನದಲ್ಲಿ ಸರ್ಕಾರ ಚರ್ಚೆ ನಡೆಸಲಿದೆ. ತದನಂತರ ಸರ್ಕಾರ ಚುನಾವಣೆ ನಡೆಸುವ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಬೆಂಗಳೂರು ಮಹಾನಗರ ಸಚಿವರು, ಶಾಸಕರುಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ಬಿಬಿಎಂಪಿಗೆ ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಗಡುವು ನೀಡಿದೆ. ಈ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ದವಿದ್ದು ವಾರ್ಡ್ ವಿಂಗಡಣೆ ಮತ್ತಿತರ ವಿಚಾರಗಳ ಬಗ್ಗೆ ಇನ್ನೆರಡು ದಿನಗಳಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು. |