ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಬಳಿಗಾರ್ ವಿರುದ್ಧ ಇದೀಗ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಮರ ಸಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕಚೇರಿಯಲ್ಲಿ ನಡೆದಿರುವ ಅಕ್ರಮಗಳ ಪೈಕಿ ಶೇಕಡ 70ರಷ್ಟು ಅಕ್ರಮಗಳನ್ನು ಬಳಿಗಾರ್ ಅವರೇ ನಡೆಸಿದ್ದಾರೆ ಎಂದು ದೂರಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅವಧಿ ಮುಗಿದ ಬಳಿಕ ಯಾವುದೇ ಸರ್ಕಾರ ಬರಲು ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ವಿ.ಪಿ. ಬಳಿಗಾರ್ ವಿರುದ್ಧ ತನಿಖೆ ನಡೆಸಿಯೇ ಸಿದ್ಧ ಎಂದು ಸವಾಲು ಹಾಕಿದ್ದಾರೆ.
ರಾಜಕೀಯ ಜೀವನದಲ್ಲಿ ಇದುವರೆಗೆ ಯಾವೊಬ್ಬ ಅಧಿಕಾರಿಯ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಆದರೆ ಬಳಿಗಾರ್ ಅಹಂಕಾರದಿಂದ ಮೆರೆಯುತ್ತಿದ್ದಾರೆ. ಅವರ ಅಹಂಕಾರ ಮುರಿಯಬೇಕಾದರೆ ಅವರು ನಡೆಸಿರುವ ಅಕ್ರಮಗಳ ಬಗ್ಗೆ ತನಿಖೆ ಆಗಲೇಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. |