ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರ ವಿರುದ್ಧ ಕಿಡಿಕಾರಿರುವ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ತಕ್ಷಣವೇ ಮುಷ್ಕರ ಕೈಬಿಡುವಂತೆ ಆದೇಶ ನೀಡಿದ್ದಾರೆ.ಕಿರಿಯ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಅವರು ತಮ್ಮ ನಿವಾಸದಲ್ಲಿ ತುರ್ತು ವಿಚಾರಣೆ ನಡೆಸಿದ್ದು, ಮುಷ್ಕರ ಕೈಬಿಡುವಂತೆ ಸೂಚಿಸಲು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ನಿರ್ದೇಶನ ನೀಡಿ, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದಾರೆ.ಕಿರಿಯ ವೈದ್ಯರು ಹೀಗೆ ಮುಷ್ಕರ ನಡೆಸುವುದು ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯನ್ಯಾಯಮೂರ್ತಿಗಳು, ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ, ವೈದ್ಯ ಪದವಿ ರದ್ದುಗೊಳಿಸುವ ಗಂಭೀರ ಎಚ್ಚರಿಕೆ ನೀಡಿದರು.ಮುಷ್ಕರ ನಿರತ ಕಿರಿಯ ವೈದ್ಯರ ಕ್ರಮಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಪರಿಣಾಮ, ಮುಷ್ಕರ ಹಿಂಪಡೆಯಲು ಕಿರಿಯ ವೈದ್ಯರು ಸಮ್ಮತಿ ಸೂಚಿಸಿದ್ದಾರೆ. ಏತನ್ಮಧ್ಯೆ ತಮ್ಮ ವಿರುದ್ಧ ಯಾವುದೇ ಕ್ರಮ ಜರುಗಿಸಬಾರದು, ಅದಕ್ಕೆ ಕ್ಷಮಾಪಣಾ ಪತ್ರ ನೀಡುವುದಾಗಿಯೂ ಕಿರಿಯ ವೈದ್ಯರ ಪರ ವಕಾಲತ್ತು ಕೈಗೊಂಡ ವಕೀಲರು ಸಲ್ಲಿಸಿದ ಮನವಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಸೇರಿಜಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಿರಿಯ ವೈದ್ಯರ ಸಂಘದ ಸದಸ್ಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೆ ದಿನಕ್ಕೆ ಕಾಲಿಟ್ಟಿತ್ತು. ಇದರಿಂದಾಗಿ ಸಾವಿರಾರು ರೋಗಿಗಳು ತೀವ್ರ ತೊಂದರೆಗೆ ಒಳಗಾಗಿದ್ದರು.ಸುಪ್ರೀಂಕೋರ್ಟ್ಗೆ ಮೇಲ್ಮನವಿ: ಕಿರಿಯ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ನೀಡಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಕಿರಿಯ ವೈದ್ಯರ ಸಂಘ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. |