ಜಾಗತಿಕವಾಗಿ ಆತಂಕಮೂಡಿಸಿರುವ 'ಹಂದಿ ಜ್ವರ' (ಎಚ್1ಎನ್1 ಸೋಂಕು) ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೂಡ ಕ್ರಮಗೊಂಡಿರುವುದಾಗಿ ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಪ್ರತಿದಿನ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 1,200 ಪ್ರಯಾಣಿಕರು ನಗರಕ್ಕೆ ಆಗಮಿಸುತ್ತಿದ್ದು, ಅವರನ್ನು ತಪಾಸಣೆ ಮಾಡುವ ವ್ಯವಸ್ಥೆಯನ್ನು ಆರಂಭಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಂ.ಮದನಗೋಪಾಲ್, ಹಂದಿಜ್ವರ ತಡೆಯುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳು ಕೂಡ ಹಂದಿ ಜ್ವರ ತಡೆಯಲು ಕೈಜೋಡಿಸಿವೆ ಎಂದು ಹೇಳಿದರು.
ಬೆಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪಟ್ಟಿಯನ್ನು ಇಮಿಗ್ರೇಶನ್ ಇಲಾಖೆಯಿಂದ ಪಡೆಯಲಾಗಿದೆ. ಈ ಎಲ್ಲ ಪ್ರಯಾಣಿಕರ ತಪಾಸಣೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು. |