1999ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ತಮಗೆ 50ಲಕ್ಷ ರೂ.ಕಪ್ಪು ಹಣ ನೀಡಿದ್ದೆ ಎನ್ನುವ ಭದ್ರಾವತಿ ಶಾಸಕ ಸಂಗಮೇಶ್ ಅರೋಪ ಹಸಿ ಸುಳ್ಳು ಎಂದಿರುವ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಅವರಿಗೆ ಆ ಕಪ್ಪು ಹಣ ಎಲ್ಲಿಂದ ಬಂತು ಎಂಬ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕುಮ್ಮಕ್ಕಿನಿಂದ ಸಂಗಮೇಶ್ ಈ ಹೇಳಿಕೆ ನೀಡಿದ್ದಾರೆ ಎಂದು ದೂರಿದರು. ತಾವು ಅವರಿಂದ ಯಾವುದೇ ಹಣ ಪಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆಗೂಡಿರುವ ಕಾಂಗ್ರೆಸ್ ಪಕ್ಷದ ಶಾಸಕ ಸಂಗಮೇಶ್ ಆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿದ್ದಾರೆ. ಈ ಕುರಿತು ಹೈಕಮಾಂಡ್ಗೆ ಪತ್ರ ಬರೆದು ಸಂಗಮೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳುವುದಾಗಿ ತಿಳಿಸಿದರು. |