ಸಚಿವರ ನಿವಾಸ ದುರಸ್ತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ತನಿಖೆಗೆ ಆದೇಶಿಸಿದ್ದಾರೆ.
ಸಚಿವರ ಮನೆ ದುರಸ್ತಿ ನೆಪದಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ ಅವರು, ಅವ್ಯವಹಾರದ ಕುರಿತು ವರದಿ ನೀಡಲು ಒಂದು ವಾರಗಳ ಕಾಲ ಗಡುವು ನೀಡಿರುವುದಾಗಿ ತಿಳಿಸಿದರು.
ಯುವ ಕಾಂಗ್ರೆಸ್ ಪ್ರತಿಭಟನೆ: ಸಚಿವರ ನಿವಾಸ ನವೀಕರಣ ಹೆಸರಲ್ಲಿ ನಡೆದಿರುವ ಭಾರಿ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದ್ದರು.
ನವೀಕರಣದ ನೆಪದಲ್ಲಿ ಶೇ.50ರಷ್ಟು ಹಣ ದುರುಪಯೋಗ ಆಗಿರುವ ಬಗ್ಗೆ ಸಚಿವರಾದ ಸುರೇಶ್ ಕುಮಾರ್ ಮತ್ತು ಪ್ರೊ.ಮುಮ್ತಾಜ್ ಆಲಿ ಖಾನ್ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಸರ್ಕಾರದ ದುರಾಡಳಿತಕ್ಕೆ ಇದು ಸಾಕ್ಷಿಯಾಗಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ವಸತಿ ಮಹಾಮಂಡಲದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. |