ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಮನೋಹರ ಮಸ್ಕಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮಂಗಳವಾರ ಗಂಗಾವತಿ ಬಂದ್ಗೆ ಕರೆ ನೀಡಿದ್ದು, ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರ ರದ್ದುಗೊಂಡಿದ್ದು, ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ಗೆ ಬೆಂಬಲ ಸೂಚಿಸು ಮೂಲಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ.
ಚುನಾವಣೆಯ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮನೋಹರ್ ಮಸ್ಕಿ , ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ, ಸಂವಿಧಾನ ರಚನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು ಎಂಬ ವಿವಾದಿತ ಹೇಳಿಕೆ ನೀಡಿ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಮಸ್ಕಿ ಹೇಳಿಕೆ ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಇತ್ತೀಚೆಗಷ್ಟೇ ರಾಯಚೂರಿನಲ್ಲಿಯೂ ಪ್ರತಿಭಟನೆ, ಹಿಂಸಾಚಾರ ನಡೆದಿತ್ತು.
ಇದೀಗ ಮಸ್ಕಿ ಹೇಳಿಕೆ ಖಂಡಿಸಿ ಗಂಗಾವತಿಯಲ್ಲಿಯೂ ಮಂಗಳವಾರ ಬಂದ್ ನಡೆದಿದ್ದು, ಮಸ್ಕಿ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆಯೇ ಲಘುವಾಗಿ ಮಾತನಾಡಿ ಅವಹೇಳನ ಮಾಡಿದ್ದಾರೆ. ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಬೇಕು, ಜಿಲ್ಲೆಯಿಂದ ಗಡಿಪಾರು ಮಾಡಬೇಕು ಹಾಗೂ ವಿಧಾನಪರಿಷತ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ದಸಂಸ ಒತ್ತಾಯಿಸಿದೆ.
ಘಟನೆಗೆ ಸಂಬಂಧಿಸಿದಂತೆ ಮಸ್ಕಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿರುವ ಸಂಘಟನೆ, ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. |