ಬೆಂಗಳೂರು: ಏಪ್ರಿಲ್ 29 ಹಾಗೂ 30 ರಂದು ನಡೆಯಬೇಕಾಗಿದ್ದ ವೃತ್ತಿ ಶಿಕ್ಷಣ ಕೋರ್ಸ್ನ ಸಾಮಾನ್ಯ ಪ್ರವೇಶ ಪರೀಕ್ಷೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಬುಧವಾರದಿಂದ ಸಿಇಟಿ ಪರೀಕ್ಷೆ ಮೂರು ದಿನಗಳ ಕಾಲ ನಡೆಯಲಿದೆ.
ಇದೇ ಮೊದಲನೇ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವುದಕ್ಕಿಂತ ಮುಂಚಿತವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆ ನಡೆಸುತ್ತಿದೆ. ದ್ವಿತೀಯ ಪಿಯುಸಿ ಫಲಿತಾಂಶ ಮೇ 10 ರಂದು ಪ್ರಕಟವಾಗಲಿದೆ.
ಒಟ್ಟು 1,20,400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ 227 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ 59 ಕೇಂದ್ರಗಳಿವೆ. ಸಿಇಟಿ ಪರೀಕ್ಷಾ ಫಲಿತಾಂಶವನ್ನು ಮೇ 25ರಂದು ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಲಿದೆ.
ನಕಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಬ್ಬೆಟ್ಟಿನ ಗುರುತನ್ನು ಪರೀಕ್ಷಿಸಲಾಗುತ್ತಿದೆ. ಸಿಇಟಿ ಪರೀಕ್ಷೆ ನಡೆಸಲು ವ್ಯಾಪಕ ಭದ್ರತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಭದ್ರತೆಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ.
ಬೆಂಗಳೂರು, ಹುಬ್ಬಳ್ಳಿ ಹಾಗೂ ಗುಲ್ಬರ್ಗ ಕೇಂದ್ರಗಳಲ್ಲಿ ಕೌನ್ಸಿಲಿಂಗ್ ನಡೆಯಲಿದ್ದು, ವಿದ್ಯಾರ್ಥಿಗಳು ಯಾವುದಾದರು ಒಂದು ಸ್ಥಳವನ್ನು ಆಯ್ಕೆ ಮಾಡಿ ಕೊಳ್ಳಬಹುದೆಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. |