ಅರ್ಕಾವತಿ ಬಡಾವಣೆಯಲ್ಲಿ ಐಎಎಸ್-ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಭೂಮಿ ನೀಡಿರುವುದನ್ನು ವಿರೋಧಿಸಿ ಬುಧವಾರ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಲಹಂಕದ ಜಕ್ಕೂರಿನಲ್ಲಿ ನಡೆದಿದೆ.
ಯಲಹಂಕದ ಜಕ್ಕೂರಿನಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಸರ್ಕಾರ 25ಎಕರೆ ಭೂಮಿ ನೀಡಿದೆ. ಇಂದು ಪೊಲೀಸ್ ಬಂದೋಬಸ್ತ್ನಲ್ಲಿ ಅಧಿಕಾರಿಗಳ ಸಂಘದಿಂದ ಭೂಮಿ ಪೂಜೆ ನಡೆಸಲು ಮುಂದಾದಾಗ ರೈತರು ತೀವ್ರ ಅಡ್ಡಿ ಉಂಟು ಮಾಡಿದರು.
ಯಾವುದೇ ಕಾರಣಕ್ಕೂ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ನಂತರ ಅವರನ್ನು ತಡೆದ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.
ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ: ಅರ್ಕಾವತಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಅಲ್ಲದೇ ಅರ್ಕಾವತಿ ಭೂ ಸ್ವಾಧೀನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಆದರೂ ಸರ್ಕಾರ ಐಎಎಸ್-ಐಪಿಎಸ್ ಅಧಿಕಾರಿಗಳನ್ನು ಮೆಚ್ಚಿಸಲು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಪೊಲೀಸ್ ಅಧಿಕಾರಿ ಶಂಕರಿ ಬಿದರಿಯವರು ಬಲವಂತವಾಗಿ ರೈತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ, ಭೂಮಿ ವಶಕ್ಕೆ ಮುಂದಾದಲ್ಲಿ ಜೆಡಿಎಸ್ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು. |