ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ 8 ಜಂಕ್ಷನ್ಗಳಲ್ಲಿ ಫ್ಲೈಓವರ್ ನಿರ್ಮಾಣವನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಬಿಡಿಎಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ ನಡೆಸುವುದಾಗಿ ಹೇಳಿದ ಅವರು, ಚುನಾವಣೆಯ ಪ್ರಕ್ರಿಯೆಯಲ್ಲಿ ಸ್ವಲ್ಪ ಬದಲಾವಣೆ ಇದೆ ಎಂದು ಹೇಳಿದರು.
ಬುಧವಾರ ಸಿಎಂ ನೇತೃತ್ವದಲ್ಲಿ ನಡೆದ ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ, ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕುರಿತು ಮಾತನಾಡಿದರು.
ಹೊರ ವರ್ತುಲ ರಸ್ತೆಯ ಎಂಟು ಜಂಕ್ಷನ್ಗಳಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯವನ್ನು ಅಕ್ಟೋಬರ್ನಲ್ಲಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 465 ಕೋಟಿ ರೂ.ಗಳ ಈ ಯೋಜನೆಯನ್ನು 2010ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.
ಇದರ ಜೊತೆಗೆ ವಿಕ್ಟೋರಿಯಾ ಹಾಗೂ ಬೌರಿಂಗ್ ಆಸ್ಪತ್ರೆಗಳ ರೀತಿಯಲ್ಲಿ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಜಾಗವನ್ನು ಕಾಯ್ದಿರಿಸುವಂತೆ ಸಹ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಗೆ ಬೆಂಗಳೂರು ಮಹಾನಗರದ ಉದ್ಯಾನವನಗಳ ಅಭಿವೃದ್ದಿ ಮಾದರಿಯಲ್ಲಿಯೇ ರಾಜ್ಯದ ಉಳಿದ ಪಾಲಿಕೆಗಳ ಉದ್ಯಾನವನಗಳ ಅಭಿವೃದ್ದಿ ಪಡಿಸಲು ಅಲ್ಲಿನ ಉಸ್ತುವಾರಿ ಸಚಿವರನ್ನು ಒಳಗೊಂಡ ಅಧಿಕಾರಿಗಳ ನಿಯೋಗ ಉದ್ಯಾನವನವನ್ನು ವೀಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಭೆಯಲ್ಲಿ ನಿರ್ದೇಶನ ನೀಡಿದರು. |