ಅರ್ಕಾವತಿ ಬಡಾವಣೆಯ ಭೂ ವಿವಾದ ಭುಗಿಲೇಳಲು ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ತಪ್ಪು ನಿರ್ಧಾರಗಳೇ ಮುಖ್ಯ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಭೂ ವಿವಾದದ ಕುರಿತು ಮಾಜಿ ಮುಖ್ಯಮಂತ್ರಿಗಳು ಈಗ ರೈತರಿಗೆ ಬೆಂಬಲ ಸೂಚಿಸಿ ಹೋರಾಟ ನಡೆಸುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಪ್ರತಿಕ್ರಿಯೆ ವ್ಯಕ್ತಪಡಿಸಿ, ಇದೀಗ ವೈಜ್ಞಾನಿಕ ರೀತಿಯಲ್ಲಿ ಭೂ ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅರ್ಕಾವತಿ ಬಡಾವಣೆಯಲ್ಲಿ ಐಎಎಸ್-ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಭೂಮಿ ನೀಡಿರುವುದನ್ನು ವಿರೋಧಿಸಿ ಬುಧವಾರ ರೈತರು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಲಹಂಕದ ಜಕ್ಕೂರಿನಲ್ಲಿ ನಡೆದಿತ್ತು.
ಯಲಹಂಕದ ಜಕ್ಕೂರಿನಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಂಘಕ್ಕೆ ಸರ್ಕಾರ 25ಎಕರೆ ಭೂಮಿ ನೀಡಿದೆ. ಇಂದು ಪೊಲೀಸ್ ಬಂದೋಬಸ್ತ್ನಲ್ಲಿ ಅಧಿಕಾರಿಗಳ ಸಂಘದಿಂದ ಭೂಮಿ ಪೂಜೆ ನಡೆಸಲು ಮುಂದಾದಾಗ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಅರ್ಕಾವತಿ ಭೂ ವಿವಾದ ಕುರಿತಂತೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದರು. |